ಬೆಂಗಳೂರು, ಫೆ.24: ರಾಜ್ಯದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ವಿವಿಧ ಆರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ವೀರಶೈವ ಲಿಂಗಾಯತ ಸಮುದಾಯದ ಧಾರ್ಮಿಕ- ರಾಜಕೀಯ ನಾಯಕರು, ಜನಪ್ರತಿನಿಧಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಸೋಮವಾರ ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು.
ಇದಕ್ಕೂ ಮುನ್ನ ಬಸವಧರ್ಮ ಪೀಠ ಕೂಡಲಸಂಗಮ ಅಧ್ಯಕ್ಷರಾದ ಮಹಾಜಗದ್ಗುರು ಪರಮಪೂಜ್ಯ ಮಾತೆ ಗಂಗಾದೇವಿಯರು, ಪರಮಪೂಜ್ಯ ಚೆನ್ನಬಸವ ಪಟ್ಟದ ದೇವರು ಬಾಲ್ಕಿ ಮಠ, ಪರಮಪೂಜ್ಯ ಜಗದ್ಗುರು ತೋಂಟದ ಸಿದ್ದರಾಮ ಸ್ವಾಮೀಜಿಯವರು ಸೇರಿದಂತೆ ವಿರಕ್ತ ಮಠದ ಅನೇಕ ಪರಮಪೂಜ್ಯ ಸ್ವಾಮೀಜಿಯವರು, ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರ ನಿವಾಸದಲ್ಲಿ ಸಭೆ ನಡೆಸಿದರು.
ತದನಂತರ ಮುಖ್ಯಮಂತ್ರಿ ಅವರ ನಿವಾಸಕ್ಕೆ ತೆರಳಿ ಮನವಿ ಅರ್ಪಿಸಲಾಯಿತು. ಈ ಸಂದರ್ಭ ಸಚಿವ ಎಂ.ಬಿ.ಪಾಟಿಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾರಾ ಭರತ್ ರೆಡ್ಡಿ, ಜಿ.ಎಸ್.ಪಾಟೀಲ್, ವಿಜಯಾನಂದ ಕಾಶಪ್ಪನವರ ಸೇರಿದಂತೆ ಅನೇಕ ಶಾಸಕರು, ಮಾಜಿ ಶಾಸಕರು, ಗಣ್ಯರು ಉಪಸ್ಥಿತರಿದ್ದರು.