ಬೆಂಗಳೂರು, ಜೂನ್ 24: ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಸಮಿತಿ ರಚನೆ ಮಾಡಿ ಸಿಎಂ ಸಿದ್ದರಾಮಯ್ಯ ಸೋಮವಾರ ಆದೇಶ ಹೊರಡಿಸಿದ್ದಾರೆ. ಸಮಿತಿ ಸದಸ್ಯರಾಗಿ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ. ಒಂದು ತಿಂಗಳೊಳಗೆ ನಿರ್ದೇಶಕರು, ಸದಸ್ಯರನ್ನ ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಿ ಸಲ್ಲಿಕೆ ಮಾಡಲು ಸಿಎಂ ಸೂಚಿಸಿದ್ದಾರೆ.
ಇನ್ನು ಡಾ.ಪರಮೇಶ್ವರ್ ನೇತೃತ್ವದಲ್ಲೇ ಸಮಿತಿ ರಚನೆ ಆದರೂ ಕೂಡ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗದ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ನೇಮಕಗೊಂಡಿದ್ದಾರೆ. ಕಂಪನಿ ಆಕ್ಟ್ 2013ರ ಆರ್ಟಿಕಲ್ಸ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(1)ರನ್ವಯ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಅಧ್ಯಕ್ಷರಾಗಿ ನೇಮಿಸಿ ಆದೇಶಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್.ಜಯದೇವ ನಾಯ್ಕ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಕಂಪನಿ ಆಕ್ಟ್ 1956ರ ಮೆಮೊರಂಡಮ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿಯ ಬೆಂಗಳೂರಿಗೆ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಅಧ್ಯಕ್ಷರಾಗಿ ನೇಮಿಸಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಡಿಜಿ&ಐಜಿಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.